Tuesday, August 26, 2025

ದೈವಾಗಮನ....


. ಯಾವುದೇ ಹಬ್ಬ ಹರಿದಿನ ಬರಲಿ ನಮ್ಮ ಮನೆಯ ರಸ್ತೆಯಲ್ಲಿ ಮೊದಲ ದಿನವೇ  ಒಂದು ಸಡಗರ ಆರಂಭವಾಗುತ್ತದೆ. ಅದೇನು ನಮ್ಮ ರಸ್ತೆಗೆ ಮಾತ್ರ ಸೀಮಿತವಲ್ಲ. ಎಲ್ಲ ಕಡೆಯೂ ಇರುತ್ತದೆ. ರಾತ್ರಿಯಾಗುತ್ತಿದ್ದಂತೆ ಮನೆಯ ಎದುರು ಗುಡಿಸಿ ನೀರು ಹಾಕಿ ಸ್ವಚ್ಛ ಮಾಡುತ್ತಾರೆ. ಮತ್ತೆ ರಂಗೋಲಿ ಹಾಕುತ್ತಾರೆ. ಇದು ಹಬ್ಬ ಹರಿದಿನ ಅಂತ ಅಲ್ಲ ಹಲವು ಸಲ ದಿನ ನಿತ್ಯವೂ ಇದೂ ಕೆಲವು ಕಡೆ ಇರುತ್ತದೆ. ವಿಚಿತ್ರವೆಂದರೆ ಮೊದಲ ದಿನ ರಾತ್ರಿ ಈ ಕೆಲಸ ಮಾಡುವುದು ಒಂದು ಅಪಭ್ರಂಶ ಎಂಬಂತೆ ನನಗೆ ಭಾಸವಾಗುತ್ತದೆ. ಸಂಪ್ರದಾಯದ ಪ್ರಕಾರ ರಾತ್ರಿ ಪೊರಕೆ ಉಪಯೋಗಿಸುವ ಹಾಗಿಲ್ಲ. ಆದರೂ ನಗರದ ಜೀವನ ಕ್ರಮದಲ್ಲಿ ಕೆಲವನ್ನು ಪಾಲಿಸುವುದು ಸಾಧ್ಯವಾಗುವುದಿಲ್ಲ ಎನೋ ಸತ್ಯ. ಆದರೆ ಅದರ ಬಗ್ಗೆ ಗಮನ ಹರಿಸಿ ಒಂದಿಷ್ಟು ಪ್ರಯತ್ನ ಮಾಡಬಹುದು. ಹೋಗಲಿ ರಾತ್ರಿ ರಂಗೋಲಿ ಹಾಕುವುದು ಮಾತ್ರ ವಿಚಿತ್ರ ಎನಿಸುತ್ತದೆ.  ಇದು ಬೆಂಗಳೂರಲ್ಲಿ ಕಂಡು ಬರುವ ಸಾಮಾನ್ಯ ದೃಶ್ಯ. ಹಲವು ಸಲ ಇದನ್ನು ಕಾಣುವಾಗ ಯಾವ ಉದ್ದೇಶಕ್ಕೆ ರಂಗೋಲಿ ಹಾಕುತ್ತಾರೆ ಎಂದು ಆಶ್ಚರ್ಯವಾಗುತ್ತದೆ. 

ನಮ್ಮ ಸಂಪ್ರದಾಯ ಪರಂಪರೆಯಲ್ಲಿ ಬಳಕೆಯಲ್ಲಿ ಬರುವ ಹಲವು ಪವಿತ್ರ ಕಾರ್ಯಗಳಿಗೆ ಅಂತರಾರ್ಥ ಇರುತ್ತದೆ.  ಮಾಡುವ ಕಾರ್ಯ ಹೊರ ನೋಟಕ್ಕೆ ಒಂದು ಕಂಡರೆ ಅದರ ಒಳನೋಟ ಬೇರೆಯೇ ಇರುತ್ತದೆ. ಅದನ್ನು ಮನಗಂಡು ನಾವು ಅದನ್ನು ಗೌರವಿಸಿ ನಡೆದು ಕೊಂಡರೆ ನಾವು ಮಾಡುವ ಆಚರಿಸುವ ಕಾರ್ಯಗಳಿಗೆ ಅರ್ಥ ಒದಗಿಬರುತ್ತದೆ. ಸಂಪ್ರದಾಯವನ್ನು ಮೀರಿ ಯಾವುದನ್ನು ಮಾಡಿದರೂ ಯಾರೇನೂ ಪ್ರಶ್ನಿಸುವುದಕ್ಕಿಲ್ಲ. ಮಾಡುವ ಸ್ವಾತಂತ್ರ್ಯ ಇದ್ದೇ ಇರುತ್ತದೆ. ಶೌಚಾಲಯದಲ್ಲಿ ಕುಳಿತು ಊಟವನ್ನೂ ಮಾಡಬಹುದು. ಮಾಡುವವರ ಸ್ವಾತಂತ್ರ್ಯ ಅಷ್ಟೇ. 

ರಂಗೋಲಿ ಹಾಕುವ ಕ್ರಮ ಎಂದರೆ ಮುಂಜಾನೆ ಸೂರ್ಯ ಉದಿಸುವ ಮೊದಲು ಹಾಕಬೇಕು.  ಸೂರ್ಯೋದಯದಲ್ಲಿ ಭಗವಂತನ ಆಗಮಿಸುತ್ತಾನೆ. ಸೂರ್ಯ ಕಿರಣಗಳೊಂದಿಗೆ ಸುಂದರವಾದ ರಂಗೋಲಿ ಹಾಕಿದರೆ ಅದು ಮುಂಜಾನೆ ಆಗಮಿಸುವ ಸಂಚರಿಸುವ  ಭಗವಂತನಿಗೆ ಅಥವಾ ಒಳ್ಳೆಯ ಶಕ್ತಿಗೆ, ಧನಾತ್ಮಕ ಚಿಂತನೆಗಳಿಗೆ ಸ್ವಾಗತ ಕೋರಿದಂತೆ. ಆದರೆ ರಾತ್ರಿ ರಂಗೋಲಿ ಹಾಕಿದರೆ..ರಾತ್ರಿ  ಋಣಾತ್ಮಕ ಪ್ರತೀಕವಾದ ಬೂತ ಪ್ರೇತ ದೆವ್ವ ಎಂಬ ಅಸುರೀಭಾವಗಳು ಸಂಚರಿಸುವುದನ್ನು ಸ್ವಾಗತಿಸಿದಂತೆ. ಭಗವಂತನ ಬದಲು ಪ್ರೇತ ಪಿಶಾಚಿಗಳನ್ನು ಮನೆಯೊಳಗೆ ಆಹ್ವಾನಿಸಿದಂತಾಗುತ್ತದೆ. ಆದರೆ ಇದನ್ನೆ ತಾಳ್ಮೆಯಿಂದ ಅರ್ಥವಿಸುವ ಗೋಜಿಗೆ ಹೋಗುವುದಿಲ್ಲ. ಒಟ್ಟು ಆಚರಿಸಬೇಕು. ಮೊದಲ ರಾತ್ರಿಯೇ ಹಾಕುವುದರಿಂದ ಮುಂಜಾನೆ ಬೇಗನೆ ಏಳುವ ಅವಶ್ಯಕತೆ ಇರುವುದಿಲ್ಲ. ಇಷ್ಟಕ್ಕೂ ನಾವು ರಂಗೋಲಿ ಹಾಕುವ ಉದ್ದೇಶವಾದರೂ ಏನು ಎಂಬುದು ತಿಳಿದಿರಬೇಕು.  ಹೀಗಾಗಿಯೇ ನಾವೇಷ್ಟು ಉತ್ಕೃಷ್ಟ ಕೆಲಸಗಳನ್ನು ಮಾಡಿದರೂ ಅಸುರೀ ಭಾವ ತಾಂಡವವಾಡುತ್ತದೆ. ನಮ್ಮ ಮನಸ್ಸು ಸದಾ ಅಶಾಂತಿಯಿಂದ ತುಂಬಿರುತ್ತದೆ ಮನೆ ಮನಗಳಲ್ಲಿ ಶಾಂತಿ ಸಮಾಧಾನ ಎಂಬುದು ಗಗನ ಕುಸುಮವಾಗುತ್ತದೆ. ನಾವು ನಾಗರೀಕರಾಗುವುದು ಎಂದರೆ ಪರಂಪರೆಯಲ್ಲಿ ಬಂದ ವಿಶಿಷ್ಟ ಶ್ರೇಷ್ಠ ಪದ್ದತಿಗಳನ್ನು ವಿರೋಧಿಸುವುದೇ ಆಗಿರುತ್ತದೆ. ಅದನ್ನು ವಿರೋಧಿಸಿ ನಡೆದುಕೊಂಡರೆ ನಾವು ನಾಗರೀಕರಾಗಿದ್ದೇವೆ ಎಂದು ಅರ್ಥವಿಸಬೇಕು. 


No comments:

Post a Comment